ಪಠ್ಯ ಪರಿಷ್ಕರಣೆ ಸಂಬಂಧಿಸಿದಂತೆ ರಾಜ್ಯ ಸರಕಾರದಿಂದ ಮಹತ್ವದ ತಿರ್ಮಾನ:
ಬೆಂಗಳೂರ: ಪಠ್ಯ ಪುಸ್ತಕದಲ್ಲಿರುವ ಆರ್ಎಸ್ಎಸ್ ಸಂಸ್ಥಾಪಕ ಕೇಶವ ಬಲಿರಾಮ ಹೆಡ್ಗೆವಾರ್ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರ ವಿಷಯಗಳನ್ನು ಕೈಬಿಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಿಜೆಪಿ ಅವಧಿಯಲ್ಲಿ ಮಾಡಿದ್ದ ಪಠ್ಯ ಪರಿಷ್ಕರಣೆಗೆ ಕೊಕ್ ನೀಡಲು ನಿರ್ಧರಿಸಲಾಗಿದೆ.
ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಇಂದಿರಾ ಗಾಂಧಿ ಅವರಿಗೆ ಬರೆದ ಪತ್ರ ‘ನೀ ಬರೆದ ಪತ್ರ’, ಸಾವಿತ್ರಿ ಬಾಯಿ ಪುಲೆ ಮತ್ತು ಡಾ.ಬಿ.ಆರ್.ಅಂಬೇಡ್ಕರ ಅವರ ವಿಷಯವನ್ನು ಮರು ಸೇರ್ಪಡೆ ಮಾಡಲಾಗುತ್ತಿದೆ. 6 ರಿಂದ 10 ನೇ ತರಗತಿಯ ಕನ್ನಡ ಮತ್ತು ಸಮಾಜ ವಿಜ್ಞಾನ ವಿಷಯದಲ್ಲಿ ಕೆಲ ಬದಲಾವಣೆ ಮಾಡಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
8ನೇ ತರಗತಿ ಕನ್ನಡ ವಿಷಯದಲ್ಲಿ ಕೆ.ಟಿ.ಗಟ್ಟಿ ಅವರು ಬರೆದಿದ್ದ ಸಾವರ್ಕರ್ ಅವರನ್ನು ಬಂಧಿಸಿಟ್ಟಿದ್ದ ಅಂಡಮಾನ್ ಜೈಲಿಗೆ ಭೇಟಿ ನೀಡಿದ ಕುರಿತು ಬರೆದಿದ್ದ ಪ್ರವಾಸ ಕಥನ ಆಧಾರಿತ ‘ಕಾಲವನ್ನು ಗೆದ್ದವರು’ ಪಾಠ ಸೇರ್ಪಡೆ ಮಾಡಲಾಗಿತ್ತು. ಈಗ ಕಾಂಗ್ರೆಸ್ ಸರ್ಕಾರ ಆ ಪಠ್ಯವನ್ನು ಕೈಬಿಡಲು ತೀರ್ಮಾನಿಸಿದೆ. 10ನೇ ತರಗತಿ ಕನ್ನಡ ಪಠ್ಯ ಪುಸ್ತಕದಲ್ಲಿ ಹೆಡ್ಗೆವಾರ್ ಅವರ ಭಾಷಣದ ತುಣುಕನ್ನು ಒಂದು ಅಧ್ಯಾಯವಾಗಿ ಸೇರ್ಪಡೆ ಮಾಡಲಾಗಿತ್ತು, ಅದನ್ನೂ ಈಗ ಕೈ ಬಿಡಲಾಗುತ್ತಿದೆ. ಅಲ್ಲದೆ, ಚಕ್ರವರ್ತಿ ಸೂಲಿಬೆಲೆ ಬರೆದಿರುವ ರಾಜಗುರು, ಭಗತ್ ಸಿಂಗ್ ಮತ್ತು ಸುಖದೇವ್ ಅವರ ಕುರಿತಾಗಿರುವ ಪಠ್ಯವನ್ನು ಕೈಬಿಡಲು ತೀರ್ಮಾನಿಸಲಾಗಿದೆ.